ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ ವರದಿಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಚಳಿಗಾಲ ಮುಗಿದು ಇನ್ನೇನು ಬೇಸಿಗೆ ಕಾಲ ಆರಂಭವಾಗುತ್ತಿದ್ದು, ಈಗಾಗಲೇ ತಾಪಮಾನದಲ್ಲಿ ಏರಿಕೆ ಕಾಣುತ್ತಿದೆ. ಹೀಗಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಈ ಬಾರಿ ಬೇಸಿಗೆಯಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ ವರದಿಯಾಗಲಿದೆ ಎಂದು ತಿಳಿಸಿದೆ.

ಈಗಾಗಲೇ ರಾಜ್ಯದ ಕಲಬುರಗಿ, ಹಾವೇರಿ, ಬಾಗಲಕೋಟೆ, ಶಿವಮೊಗ್ಗ, ಉತ್ತರ ಕನ್ನಡದಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ವರದಿಯಾಗಿದ್ದು, 2 ರಿಂದ 3 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಳ ಕಂಡುಬಂದಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಇನ್ನಷ್ಟು ಹೆಚ್ಚಾಗಲಿದ್ದು, ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 42 ರಿಂದ 45 ಡಿಗ್ರಿ ಸೆಲ್ಸಿಯಸ್‌ಗೆ ಹೆಚ್ಚಲಿದೆ. ಬೆಂಗಳೂರಿನಲ್ಲಿ ಕೂಡ ತಾಪಮಾನ 39 ಡಿಗ್ರಿಗೆ ತಲುಪಲಿದೆ ಎಂದು ಮಾಹಿತಿ ನೀಡಿದೆ.

ಈ ಕುರಿತು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದು, ಮಾ.1ರಿಂದ ಬೇಸಿಗೆ ಆರಂಭವಾಗಲಿದ್ದು, ಆದರೆ ಬೇಸಿಗೆಗಿಂತ ಮೊದಲೇ ಫೆಬ್ರವರಿಯಲ್ಲಿ ಬಿಸಿಲು ಹೆಚ್ಚಾಗಿದೆ. ಜಾಗತಿಕ ತಾಪಮಾನ, ತೇವಾಂಶ ಕೊರತೆಯಿಂದ ಬಿಸಿಲು ಹೆಚ್ಚಿರಲಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *