ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪ್ರಸಿದ್ಧ ನಾಗಾರಾಧನಾ ಕ್ಷೇತ್ರವಾದ ಕುಕ್ಕೆ ಸುಬ್ರಮಣ್ಯ ಟೆಂಪಲ್ ಗೆ ಬಾಲಿವುಡ್ ನಟ ಅರ್ಜುನ್ ಕಪೂರ್ ಭೇಟಿ ನೀಡಿ ವಿಶೇಷ ಪೂಜಾ ಸೇವೆಗಳನ್ನು ಸಲ್ಲಿಸಿದರು.

ಶನಿವಾರ ದೇವಸ್ಥಾನಕ್ಕೆ ಆಗಮಿಸಿದ ನಟ ಅರ್ಜುನ್ ಕಪೂರ್ ಅವರು ಕಳೆದ ಮೂರು ದಿನಗಳಿಂದ ಕ್ಷೇತ್ರದಲ್ಲಿ ವಾಸ್ತವ್ಯವಿದ್ದು, ಭಾನುವಾರ ಸರ್ಪಸಂಸ್ಕಾರ ಸೇವೆ ಸಲ್ಲಿಸಿದರು. ಬಳಿಕ ಸೋಮವಾರ ಆಶ್ಲೇಷ ಬಲಿ ಪೂಜೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು.




ನಾಗಾರಾಧನೆಯ ಪುಣ್ಯಕ್ಷೇತ್ರವೆಂದೇ ಪ್ರಸಿದ್ಧಿಯಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಿದ್ದು, ಸಾಮಾನ್ಯ ಭಕ್ತರ ಜೊತೆಗೆ ಅನೇಕ ಗಣ್ಯರು ಹಾಗೂ ಸಿನಿತಾರೆಯರೂ ಇಲ್ಲಿ ಭೇಟಿ ನೀಡುವುದು ಸಾಮಾನ್ಯವಾಗಿದೆ.
ಪೂಜೆ ಬಳಿಕ ನಟ ಅರ್ಜುನ್ ಕಪೂರ್ ಅವರು ದೇವಾಲಯದ ಆಡಳಿತ ಕಚೇರಿಗೆ ಭೇಟಿ ನೀಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರನ್ನು ಭೇಟಿಯಾದರು. ಈ ವೇಳೆ ದೇವಾಲಯದ ವತಿಯಿಂದ ಅವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ದೇವಾಲಯದ ಪಿಆರ್ಓ ಜಯರಾಮ್ ರಾವ್, ಮನ್ಮಥ ಭಟ್ಟೋಡಿ ಸೇರಿದಂತೆ ದೇವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.


