ಕಡಬ : ಕಡಬ ತಾಲೂಕಿನ ಅಲಂಕಾರು ಗ್ರಾಮದಲ್ಲಿ ಗುರುವಾರ ಸಂಜೆ ಸುರಿದ ಮಳೆಯ ವೇಳೆ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದ ಘಟನೆ ಸಂಭವಿಸಿದೆ.
ಸಂಜೆಯ ವೇಳೆಯಲ್ಲಿ ಏಕಾಏಕಿ ಆರಂಭವಾದ ಮಳೆ ಸಾಮಾನ್ಯ ಪ್ರಮಾಣದಲ್ಲಿದ್ದರೂ ಸಿಡಿಲಿನ ಅಬ್ಬರ ಮಾತ್ರ ಭಾರೀ ಆತಂಕ ಮೂಡಿಸಿತು. ಅಲಂಕಾರ ಗ್ರಾಮದ ಮನೆಯೊಂದರ ಆವರಣದಲ್ಲಿ ನಿಂತಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದು, ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡು ಉರಿಯತೊಡಗಿತು.
ಈ ಘಟನೆಗೆ ಸಂಬಂಧಿಸಿದ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.






ಸಿಡಿಲಿನ ಪರಿಣಾಮವಾಗಿ ವಿದ್ಯುತ್ ಲೈನ್ಗಳಿಗೆ ಹಾನಿಯಾಗಿದ್ದು, ಕಡಬ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಮೆಸ್ಕಾಂ ಸಿಬ್ಬಂದಿಗಳು ಹಾನಿಗೊಂಡ ವಿದ್ಯುತ್ ಮಾರ್ಗಗಳನ್ನು ಸರಿಪಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಮಳೆ ಭೂಮಿಗೆ ತಂಪು ನೀಡಿದರೂ, ಬಿರುಗಾಳಿ ಹಾಗೂ ಸಿಡಿಲಿನ ಅಬ್ಬರ ಜನರಲ್ಲಿ ಭೀತಿಯ ವಾತಾವರಣವನ್ನು ಉಂಟುಮಾಡಿದೆ.



