ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಜನ್ಮದಿನದ ಪ್ರಯುಕ್ತ ಕಡಬ ತಾಲೂಕಿನಾದ್ಯಂತ ವಿವಿಧ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳು ನಡೆಯಿತು.
ಈ ಸಂದರ್ಭ ಕಡಬ ತಾಲೂಕಿನ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ವರ್ಗ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ವತಿಯಿಂದ ಕಡಬ ಪಟ್ಟಣದ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ನಂತರ ನೂಜಿಬಾಳ್ತಿಲದಲ್ಲಿರುವ ಬೆಥನಿ ಅನಾಥಾಶ್ರಮಕ್ಕೆ ಭೇಟಿ ನೀಡಿ ಅಲ್ಲಿನ 30 ಮಂದಿ ವೃದ್ಧರಿಗೆ ಹಣ್ಣು-ಹಂಪಲು ವಿತರಿಸಲಾಯಿತು.




ಇದೇ ವೇಳೆ ಇಚ್ಲಂಪಾಡಿಯ ವೃದ್ಧಾಶ್ರಮದಲ್ಲಿ ವಾಸವಿರುವ 32 ಮಂದಿ ವೃದ್ಧರಿಗೆ ಹಣ್ಣುಹಂಪಲು ವಿತರಣೆ ಮಾಡಿ ಆತ್ಮೀಯವಾಗಿ ಸಾಂತ್ವನ ಹೇಳಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ. ಸವಣೂರು, ಆಲಂಕಾರು ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ಇಂದುಶೇಖರ ಶೆಟ್ಟಿ, ಕಡಬ ವಲಯ ಒಕ್ಕೂಟದ ಅಧ್ಯಕ್ಷ ರಮೇಶ್ ರೈ ಅರ್ಪಾಜೆ, ಜನಜಾಗೃತಿ ವೇದಿಕೆ ಸದಸ್ಯೆ ಸರೋಜಿನಿ ಆಚಾರ್ಯ, ನೂಜಿಬಾಳ್ತಿಲ ಒಕ್ಕೂಟದ ಅಧ್ಯಕ್ಷ ಸುಧೀಶ್ ಕುಮಾರ್ ಮಂಜೋಳಿ ಮೂಲೆ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಬಿಳಿನೆಲೆ ವಲಯ ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ ನಿರೂಪಿಸಿ ವಂದಿಸಿದರು.



