ಮಂಗಳೂರು : ವಿದೇಶಿ ಕಾಯ್ದೆ ಉಲ್ಲಂಘನೆ ಸೇರಿದಂತೆ ವಿವಿಧ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ 12 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಉಡುಪಿಯಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಡುಪಿ ನಿವಾಸಿ ತಾಜ್ ಮೊಹಮ್ಮದ್ ಯುಸೂಫ್ (59) ಎಂದು ಗುರುತಿಸಲಾಗಿದೆ. ಈತನ ವಿರುದ್ಧ 2014ರಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿದೇಶಿ ಕಾಯ್ದೆ (Foreigners Act) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.




ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕ (ASP) ಯಶ್ ಕುಮಾರ್ ಶರ್ಮಾ (IPS) ರವರ ನೇರ ನಿರ್ದೇಶನದಂತೆ ಈ ಕಾರ್ಯಾಚರಣೆ ನಡೆದಿದೆ. ಪೊಲೀಸ್ ಉಪ ನಿರೀಕ್ಷಕರುಗಳಾದ ಮಂಜುನಾಥ ಟಿ ಮತ್ತು ಕೃಷ್ಣಕಾಂತ ಕೆ ರವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಸಿಬ್ಬಂದಿ ಶಿವಾನಂದ ಮಡ್ಡಿ, ಶಿದ್ದಪ್ಪ ಮತ್ತು ಪ್ರವೀಣ್ ಅವರನ್ನೊಳಗೊಂಡ ತಂಡವು ಖಚಿತ ಮಾಹಿತಿಯ ಮೇರೆಗೆ ಉಡುಪಿಯ ಕಾರ್ಕಳ ಪರಿಸರದಲ್ಲಿ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದೆ.



