ಪುತ್ತೂರು: ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡುವ ಹಾಗೂ ಸಕಾಲಿಕವಾಗಿ ಸಹಾಯ ಹಸ್ತ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಅಕ್ಕ ಪಡೆ’ ಆರಂಭಿಸಿದ್ದು ಜ.3ರಂದು ಪುತ್ತೂರು ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಗೆ ಪೂರಕವಾಗಿ ಕಾರ್ಯಾರಂಭಕ್ಕೆ ಚಾಲನೆ ನೀಡಲಾಗಿದೆ.


ಎರಡು ವರ್ಷಗಳ ಹಿಂದೆ ಬೀದರ್ನಲ್ಲಿ ಪ್ರಾಯೋಗಿಕವಾಗಿ ಅಕ್ಕ ಪಡೆ ಆರಂಭಿಸಲಾಗಿತ್ತು. ಅಲ್ಲಿ ಯಶಸ್ವಿದ್ದರಿಂದ ಅಕ್ಕಪಡೆಯನ್ನು ರಾಜ್ಯವ್ಯಾಪಿ ವಿಸ್ತರಿಸಿ, ಜಿಲ್ಲೆಗೆ ಒಂದರಂತೆ ವಾಹನ ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಈ ಪಡೆ ಕಾರ್ಯನಿರ್ವಹಿಸಲಿದೆ. ಸಹಾನುಭೂತಿ ಮತ್ತು ಸಮುದಾಯ ಸೇವೆಯಲ್ಲಿ ಸ್ಪಂದಿಸುವ ಸುರಕ್ಷತಾ ಘಟಕವಾಗಿ ಮತ್ತು ಶೈಕ್ಷಣಿಕ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತದೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅಕ್ಕಪಡೆಯನ್ನು ಸಹಾಯಕ ಪೊಲೀಸ್ ಅಧೀಕ್ಷಕ ಅನಿಲ್ ಬೂಮಾರೆಡ್ಡಿಯವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.





ಈ ಸಂದರ್ಭ ಪುತ್ತೂರು ಮಹಿಳಾ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುನಿಲ್ ಕುಮಾರ್, ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಜಾನ್ಸನ್ ಡಿಸೋಜ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಎಸ್.ಐ ಸುಷ್ಮಾ ಭಂಡಾರಿ, ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಎ.ಎಸ್.ಐ ರಾಮಚಂದ್ರ ಗೌಡ, ಶಿವಪ್ರಸಾದ್ ಗೌಡ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹರೀಶ್, ಮಂಗಲಕಾಳೆ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ರಜಾಕ್ ಬಪ್ಪಳಿಗೆ, ಪ್ರಹ್ಲಾದ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.




