ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆ ಅಜಕ್ಕಲ ಕೋಂಕೆ ಪ್ರದೇಶದಲ್ಲಿ ರಸ್ತೆ ವಿಚಾರಕ್ಕೆ ಸಂಬಂಧಿಸಿದ ಮಹಿಳೆಗೆ ಜಾತಿ ನಿಂದನೆ ಮಾಡಿರುವುದಾಗಿ ದಾಖಲಾಗಿದ್ದ ಪ್ರಕರಣದಲ್ಲಿ, ಆರೋಪಿಗೆ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.



ಬಲ್ನಾಡು ಗ್ರಾಮದ ಅಜಕ್ಕಲ ನಿವಾಸಿ ಕೃಷ್ಣ ಭಟ್ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ. ನವೆಂಬರ್ 19ರಂದು ಬಲ್ನಾಡು ಗ್ರಾಮದ ಅಜಕ್ಕಲ ಕೋಂಕೆ ಪ್ರದೇಶದಲ್ಲಿ ಹಿಟಾಚಿ ಯಂತ್ರದ ಮೂಲಕ ರಸ್ತೆ ಅಗೆದು ಧರೆ ನಿರ್ಮಾಣ ಮಾಡುತ್ತಿದ್ದ ವೇಳೆ, ರತ್ನ ಎಂಬವರು ವಿಚಾರಿಸಿದಾಗ ಕೃಷ್ಣ ಭಟ್ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಜಾತಿ ನಿಂದನೆ ಮಾಡಿದ್ದಾರೆಂದು ಆರೋಪಿಸಿ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.




ಈ ಘಟನೆಯ ಹಿನ್ನೆಲೆಯಲ್ಲಿ ಟಿಪ್ಪರ್ ಚಾಲಕ, ಹಿಟಾಚಿ ಚಾಲಕ ಸೇರಿದಂತೆ ಇತರರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಪ್ರಕರಣದ ಒಂದನೇ ಆರೋಪಿ ಕೃಷ್ಣ ಭಟ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.
ಆರೋಪಿ ಪರವಾಗಿ ಹಿರಿಯ ವಕೀಲ ಡಿ. ಶಂಬು ಭಟ್ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.


