ಕಡಬ: ಬೇಸಿಗೆಯಲ್ಲಿ ಪರಿಸರದ ಕೃಷಿ ತೋಟಗಳಿಗೆ ನೀರಿನ ಕೊರತೆ ಮತ್ತು ಕಡಬ ಪರಿಸರಕ್ಕೆ ಕುಡಿಯುವ ನೀರಿನ ಸಮಸ್ಯೆಗಳು ಅನೇಕವಾಗುತ್ತಿರುವುದರಿಂದ ಕುಮಾರಧಾರಾ ನದಿಗೆ ಕಡಬದ ಮೂರಾಜೆ ಅಥವ ಪಿಜೆಕ್ಕಳ ಭಾಗದಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಬೇಕೆಂಬ ಬೇಡಿಕೆ ಮತ್ತೆ ಜೋರಾಗಿದೆ.

ಸ್ಥಳೀಯ ರೈತರು ಹಾಗೂ ಗ್ರಾಮಸ್ಥರ ಅಭಿಪ್ರಾಯದಂತೆ, ಕಿಂಡಿ ಅಣೆಕಟ್ಟು ನಿರ್ಮಾಣವಾದರೆ ಪರಿಸರದ ಕೆರೆ, ಬಾವಿ ಹಾಗೂ ಇತರ ಜಲಮೂಲಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗುವುದಲ್ಲದೆ, ನೀರಾವರಿ ಹಾಗೂ ಕುಡಿಯುವ ನೀರಿನ ಸಮಸ್ಯೆಗೂ ಪರಿಹಾರ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಈಡೇರಿದರೆ ಅಣೆಕಟ್ಟಿನಿಂದ ಸುತ್ತಮುತ್ತಲಿನ ಗ್ರಾಮಗಳಿಗೆ ಬೋರ್‌ವೆಲ್‌ಗಳ ಅವಲಂಬನೆ ಕಡಿಮೆಯಾಗಲಿದ್ದು, ಭೂಗರ್ಭ ಜಲಮಟ್ಟವೂ ಸುಧಾರಣೆಯಾಗಲಿದೆ ಎನ್ನಲಾಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಜನರಿಗೆ ಕುಡಿಯುವ ನೀರಿನ ಪೂರೈಕೆಯಲ್ಲೂ ಅಣೆಕಟ್ಟು ಪ್ರಮುಖ ಪಾತ್ರವಹಿಸಲಿದೆ. ಈಗಾಗಲೇ ಕೆಲವು ಭಾಗಗಳಲ್ಲಿ ನೀರಿನ ಕೊರತೆ ತೀವ್ರವಾಗಿದ್ದು, ಬರುವ ಬೇಸಿಗೆಯಲ್ಲಿ ಸಮಸ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ-ದಯಾನಂದ ಪೊಯ್ಯೇತಡ್ಕ, ಪಟ್ಟಣ ಪಂಚಾಯತ್ ಸದಸ್ಯರು.
ಈ ಹಿನ್ನೆಲೆಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಅಗತ್ಯ ಯೋಜನೆ ರೂಪಿಸಿ ಶೀಘ್ರ ಅನುಷ್ಠಾನಗೊಳಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

Leave a Reply

Your email address will not be published. Required fields are marked *