ಪುತ್ತೂರು: ಮಾಧ್ಯಮಗಳ ಮುಂದೆ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡೆ ಪ್ರತಿಭಾ ಕುಳಾಯಿಗೆ ಪುತ್ತೂರು ನಗರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.





ಲವ್, ಸೆಕ್ಸ್ ಹಾಗೂ ಧೋಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ತಮ್ಮ ಹಾಗೂ ಕುಟುಂಬದ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ ಕೃಷ್ಣ ಜೆ. ರಾವ್ ಅವರ ತಂದೆ ಪಿ.ಜಿ. ಜಗನ್ನಿವಾಸ್ ರಾವ್ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ದೂರು ಸಲ್ಲಿಸಿದ್ದರು.
ಈ ದೂರಿನ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಪುತ್ತೂರು ನಗರ ಪೊಲೀಸ್ ಠಾಣೆಗೆ ವಿಚಾರಣೆ ನಡೆಸುವಂತೆ ಆದೇಶ ನೀಡಿತ್ತು. ಅದರಂತೆ ಪುತ್ತೂರು ನಗರ ಠಾಣೆಯಿಂದ ಜನವರಿ 27 ರಂದು ಪ್ರತಿಭಾ ಕುಳಾಯಿಗೆ ನೋಟಿಸ್ ಜಾರಿ ಮಾಡಲಾಗಿದೆ.


ಆದರೆ, ಪೊಲೀಸರ ನೋಟಿಸ್ಗೆ ಈವರೆಗೆ ಪ್ರತಿಭಾ ಕುಳಾಯಿ ಯಾವುದೇ ಉತ್ತರ ನೀಡಿಲ್ಲ ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಮುಂದಿನ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


