ಪುತ್ತೂರು: ಪುತ್ತೂರಿನಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆಯಾದ ಹಿನ್ನೆಲೆಯಲ್ಲಿ, ಹಳೆ ನ್ಯಾಯಾಲಯ ಕಟ್ಟಡ ಸಂಕೀರ್ಣದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸರ್ಕಾರಿ ಇಲಾಖೆಗಳಿಗೆ ಸ್ಥಳಾವಕಾಶ ಕಲ್ಪಿಸಬೇಕೆಂದು ಸಹಾಯಕ ಆಯುಕ್ತರು, ಪುತ್ತೂರು ಉಪವಿಭಾಗ ಅವರಿಗೆ ಮನವಿ ಸಲ್ಲಿಸಲಾಗಿದೆ.





ಮನವಿಯಲ್ಲಿ, ನೂತನ ನ್ಯಾಯಾಲಯ ಸಂಕೀರ್ಣದಲ್ಲಿ ಪುತ್ತೂರು ತಾಲೂಕಿನ ಎಲ್ಲಾ ನ್ಯಾಯಾಲಯಗಳ ಕಾರ್ಯಚಟುವಟಿಕೆಗಳಿಗೆ ಅಗತ್ಯವಿರುವ ಸಮರ್ಪಕ ಕಟ್ಟಡ ಹಾಗೂ ಮೂಲಸೌಕರ್ಯಗಳು ಲಭ್ಯವಿರುವುದರಿಂದ, ಪುತ್ತೂರು ಹೃದಯ ಭಾಗದಲ್ಲಿರುವ ಕಿಲ್ಲೆ ಮೈದಾನದ ಹಳೆ ನ್ಯಾಯಾಲಯ ಕಟ್ಟಡವನ್ನು ಈಗಾಗಲೇ ತೆರವುಗೊಳಿಸಲಾಗುತ್ತಿದೆ ಎಂದು ಉಲ್ಲೇಖಿಸಲಾಗಿದೆ.
ಪ್ರಸ್ತುತ ಪುತ್ತೂರು ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಹಕಾರ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಐ.ಟಿ.ಡಿ.ಪಿ. ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ಹಲವು ಸರ್ಕಾರಿ ಇಲಾಖೆಗಳು ಬಾಡಿಗೆ ಕಟ್ಟಡಗಳು ಅಥವಾ ಇತರ ಇಲಾಖೆಗಳ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರಿಂದ ಸರ್ಕಾರಕ್ಕೆ ಅನಗತ್ಯ ಬಾಡಿಗೆ ವೆಚ್ಚವಾಗುವುದರ ಜೊತೆಗೆ ಸಾರ್ವಜನಿಕರಿಗೆ ಅನಾನುಕೂಲ ಉಂಟಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಆದ್ದರಿಂದ, ಕರ್ನಾಟಕ ಲೋಕೋಪಯೋಗಿ ಇಲಾಖೆ, ನ್ಯಾಯಾಂಗ ಇಲಾಖೆ ಹಾಗೂ ಬಾರ್ ಅಸೋಸಿಯೇಷನ್ ಜೊತೆ ಸಮಾಲೋಚನೆ ನಡೆಸಿ, ಈ ಎಲ್ಲಾ ಸರ್ಕಾರಿ ಇಲಾಖೆಗಳನ್ನು ಹಳೆ ನ್ಯಾಯಾಲಯ ಕಟ್ಟಡ ಸಂಕೀರ್ಣಕ್ಕೆ ಸ್ಥಳಾಂತರಿಸುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ.




