ರಸ್ತೆ ಸಮಸ್ಯೆ ಸೇರಿದಂತೆ ಗ್ರಾಮಸ್ಥರು ಹಲವಾರು ಬಾರಿ ಮನವಿ ಸಲ್ಲಿಸಿದರೂ ಸಹಾಯಕ ಕಮಿಷನರ್ (AC) ಸ್ಥಳಕ್ಕೆ ಭೇಟಿ ನೀಡದೇ ಪರಿಶೀಲನೆ ನಡೆಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿದರು. ಆಗ ಸ್ಥಳಕ್ಕೆ ಬಂದ ಅಧಿಕಾರಿಗಳು ‘’ನಗರೋತ್ತನ ಯೋಜನೆ ಎಂಬ ಹೇಳಿಕೆ ನೀಡಿ ರಸ್ತೆ ಸರಿಪಡಿಸುವ ಭರವಸೆ ನೀಡಿದ್ದರು. ಆದರೆ ಚುನಾವಣೆ ಮುಗಿದರೂ ಕಾಮಗಾರಿಯಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ.





ಈ ನಡುವೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮದ್ದತ್ತಿನಲ್ಲಿ ಬಹುಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ರಸ್ತೆಯು ಸುಮಾರು 40 ವರ್ಷಗಳಿಂದ ಸೇವೆಯಲ್ಲಿದ್ದರೂ, ಈಗ ಸಂಪೂರ್ಣವಾಗಿ ಹೊಂಡಗುಂಡಿಗಳಿಂದ ಕುಸಿದುಹೋಗಿದೆ. ಇದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳು ಜೀವ ಭಯದಲ್ಲೇ ಓಡಾಡುವಂತಾಗಿದೆ. ರಸ್ತೆಯ ಸ್ಥಿತಿ ಎಷ್ಟು ಹದಗೆಟ್ಟಿದೆ ಎಂದರೆ, ತುರ್ತು ಸಂದರ್ಭಗಳಲ್ಲಿ ಆಂಬುಲೆನ್ಸ್ಗಳು ಸಹ ಸಂಚರಿಸಲು ಕಷ್ಟಪಡುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಪಂಚಾಯತ್ ವಿರುದ್ಧ ‘ಬಿಕ್ಷಾಟನಾ ಅಭಿಯಾನ’ ಅಸ್ತ್ರ
ರಸ್ತೆ ಅಭಿವೃದ್ದಿ ಬಗ್ಗೆ ಪಂಚಾಯತ್ ಅಧಿಕಾರಿಗಳನ್ನು ಪ್ರಶ್ನಿಸಿದಾಗ, “ಅನುದಾನದ ಕೊರತೆಯಿದೆ, ಹಣವಿಲ್ಲ” ಎಂಬ ಉತ್ತರವನ್ನು ಗ್ರಾಮಸ್ಥರು ಆರೋಪಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ನಿವಾಸಿಗಳು ಸಾರ್ವಜನಿಕವಾಗಿ ಭ್ರಷ್ಟಾಚಾರ ವಿರೋಧಿ ಹೋರಾಟ ಆರಂಭಿಸಿದ್ದು, ಈ ಹೋರಾಟಕ್ಕೆ ಸರ್ಕಾರಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ದೂರಿದ್ದಾರೆ.
ಸ್ಥಳೀಯ ನಿವಾಸಿಗಳ ಆರೋಪ ಪ್ರಕಾರ, ಸೋಮವಾರ ಮಹಿಳಾ ಮಹಾಸಂಘದ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಿದ್ದು, ಪಟ್ಟಣ ಪಂಚಾಯತ್ ಅಧ್ಯಕ್ಷರಾದ ತಮನ್ನಾ ಜಬೀನ್ ಹಾಗೂ ಮುಖಂಡರಿಗೆ ರಸ್ತೆ ದುರಸ್ಥಿಗೆ ಆಗ್ರಹಿಸಲಾಗಿದೆ. ಶಾಲಾ ಮಕ್ಕಳು, ವೃದ್ಧರು ಹಾಗೂ ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿರುವುದರಿಂದ ತಕ್ಷಣ ರಸ್ತೆ ಸರಿಪಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.




